ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ – ಕಹಳೆ ನ್ಯೂಸ್

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.
ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ ತೀವ್ರ ಸಮಸ್ಯೆಯಾಗುತ್ತಿದ್ದು ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ ಎಂಬ ಹಲವಾರು ದೂರುಗಳು ಕೇಳಿ ಬರುತ್ತಿವೆ. ತುರ್ತು ಸಂದರ್ಭದಲ್ಲಿ ಅಂತೂ ದೂರವಾಣಿ ಸಂಪರ್ಕ ಸಾಧ್ಯವಾಗದೇ ವೈದ್ಯಕೀಯ ಸೇವೆಯಂತಹ ಅಗತ್ಯ ಕಾರ್ಯಗಳಿಗೆ ತೊಂದರೆಯಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಆಕ್ರೋಶಗೊಂಡಿದ್ದಾರೆ.
ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಂಡು ಜೈಲಿನ ಜಾಮರ್ ಜೈಲು ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ತಪ್ಪಿಸುವಂತೆ ಶಾಸಕರು ಒತ್ತಾಯಿಸಿದರು.