Friday, September 20, 2024
ರಾಜಕೀಯಸುದ್ದಿ

ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ –ಕಹಳೆ ನ್ಯೂಸ್

ಬೆಳಗಾವಿ: ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರುಗಳಿಗೆ ಖಾತೆ ಹಂಚಿಕೆಯ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕಗ್ಗಂಟಾಗಿ ಪರಿಣಮಿಸಿರುವಂತೆ ಇದೆ. ಈ ಪ್ರಕ್ರಿಯೆ ಇನ್ನೊಂದಿಷ್ಟು ದಿನಗಳ ಕಾಲ ಮುಂದಕ್ಕೆ ಹಾಕುವಲ್ಲಿ 15 ಮಂದಿ ಅನರ್ಹ ಶಾಸಕರು ಯಶಸ್ವಿಯಾಗಿದ್ದಾರೆ ಎಂಬುದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

ಖಾತೆ ಹಂಚಿಕೆ ವಿಚಾರದಲ್ಲಿ ಅನರ್ಹ ಶಾಸಕರು ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕುತ್ತಿದ್ದು, ಪಕ್ಷದ ಹಿರಿಯ ನಾಯಕರಿಗೂ ಪ್ರಮುಖ ಖಾತೆಗಳನ್ನು ನೀಡಲಾಗದ ಸಂದಿಗ್ದ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಸಿಲುಕಿಕೊಂಡಿದ್ದಾರೆ.
ಅನರ್ಹ ಶಾಸಕರು ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ನೀಡಿರುವ ಭರವಸೆ ಈಡೇರಿಸುವುದಾಗಿ ಹೇಳಲಾಗಿದೆ. ದೆಹಲಿಯಲ್ಲಿ ಬೀಡು ಬಿಟ್ಟಿರುವ ಎಲ್ಲಾ ಅನರ್ಹ ಶಾಸಕರು, ತಮಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಬಗ್ಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಮೇಶ್ ಜಾರಕಿಹೊಳಿ ನೇತೃತ್ವದ ಅನರ್ಹ ಶಾಸಕರ ಗುಂಪು ಮಹತ್ವ ವಿಲ್ಲದ ಖಾತೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಠಳ್ಳಿ ಎರಡು ವರ್ಷಗಳ ಕಾಲ ಹೋರಾಡಿ ಕೊನೆಗೂ ಆಪರೇಷನ್ ಕಮಲ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ

ಜಾಹೀರಾತು


ಇಬ್ಬರಿಗೂ ಯಡಿಯೂರಪ್ಪ ಸಂಪುಟದಲ್ಲಿ ಬಂಪರ್ ಕೊಡುಗೆ ನೀಡುವ ಸಾಧ್ಯತೆಗಳಿವೆ. ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.