Friday, September 20, 2024
ಸುದ್ದಿ

ಮೈಸೂರು ದಸರಾ ಖಾಸಗಿ ದರ್ಬಾರ್‍ಗೆ ಸಿದ್ದವಾಯಿತು ‘ಸಿಂಹಾಸನ’ – ಕಹಳೆ ನ್ಯೂಸ್

ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯುತ್ತವೆಯಾದರೂ ಅದರಲ್ಲಿ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಪ್ರಮುಖವಾಗಿದೆ. ಈ ಬಗ್ಗೆ ಒಂದು ವರದಿ ನಿಮಗಾಗಿ..

ಖಾಸಗಿ ದರ್ಬಾರ್ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನಡೆಸಿಕೊಡುತ್ತಿದ್ದು, ಅದಕ್ಕಾಗಿಯೇ ರತ್ನಖಚಿತ ಸಿಂಹಾಸನ ಜೋಡಣೆಗೊಂಡು ಸಕಲ ರೀತಿಯಲ್ಲಿ ಸಿದ್ದಗೊಂಡಿದೆ. ನವರಾತ್ರಿ ಆರಂಭವಾಗುತ್ತಿದ್ದಂತೆಯೇ ರತ್ನಖಚಿತ ಸಿಂಹಾಸನದಲ್ಲಿ ರಾಜಗಾಂಭೀರ್ಯದಲ್ಲಿ ಆಸೀನರಾಗಿ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಭಾರ್ ನಡೆಸಿಕೊಡುತ್ತಿದ್ದು, ಈ ವೇಳೆ ಗತ ಇತಿಹಾಸ ಮರಳಿ ಬಂದಂತೆ ಭಾಸವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರತ್ನ ಖಚಿತ ಸಿಂಹಾಸನ ಇಂದಿನದಲ್ಲ ಇದಕ್ಕೆ ತನ್ನದೇ ಆದ ಇತಿಹಾಸ ಇರುವುದನ್ನು ನಾವು ಕಾಣಬಹುದಾಗಿದೆ. ಬಿಡಿ, ಬಿಡಿಯಾಗಿರುವ ಸಿಂಹಾಸನವನ್ನು ದಸರಾ ಸಂದರ್ಭ ಬಿಗಿ ಭದ್ರತೆಯಲ್ಲಿ ಗೆಜ್ಜಗಳ್ಳಿ ಗ್ರಾಮಸ್ಥರು ಅರಮನೆಗೆ ಬಂದು ಜೋಡಿಸಿ ಹೋಗುವುದು ಸಂಪ್ರದಾಯ ಅದರಂತೆ ಈಗಾಗಲೇ ಸಿಂಹಾಸನದ ಜೋಡಣಾ ಕಾರ್ಯ ಮುಗಿದಿದ್ದು ಶ್ವೇತವಸ್ತ್ರದಿಂದ ಮುಚ್ಚಲಾಗಿದೆ.

ಜಾಹೀರಾತು

ದಸರಾ ಆರಂಭದ ದಿನ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಸೀನರಾಗಿ ಖಾಸಗಿ ದರ್ಬಾರ್ ನಡೆಸುತ್ತಾರೆ. ಇದು ಒಂಭತ್ತು ದಿನಗಳ ಕಾಲ ನಡೆಯುತ್ತದೆ. ಮೈಸೂರು ಸಂಸ್ಥಾನದ ಪ್ರತೀಕವಾಗಿರುವ ಸಿಂಹಾಸನವು ಹಲವು ವೈಶಿಷ್ಟ್ಯತೆಯನ್ನು ಹೊಂದಿದ್ದು, ಪುರಾತನವಾದದ್ದೆಂದು ಹೇಳಲಾಗಿದೆ. ಈ ಸಿಂಹಾಸನದ ಹಿಂದೆ ಪೌರಾಣಿಕ ಕಥೆಯೂ ಅಡಗಿರುವುದನ್ನು ನಾವು ಕಾಣಬಹುದು.

ಇದು ಪಾಂಡವರ ಕಾಲದ್ದು ಎನ್ನಲಾಗಿದ್ದು, ಆ ಕಾಲದಲ್ಲಿ ಕಂಪುಲ ರಾಜನು ಇದನ್ನು ತಂದು ಪೆನಗೊಂಡದಲ್ಲಿ ಹೂತಿಟ್ಟಿದ್ದನು ಎನ್ನಲಾಗಿದೆ. 1338ರಲ್ಲಿ ಮಹರ್ಷಿ ವಿದ್ಯಾರಣ್ಯರು ಧ್ಯಾನದೃಷ್ಠಿಯಿಂದ ಇದನ್ನು ಅರಿತು ವಿಜಯನಗರದ ಚಕ್ರಾಧಿಪತ್ಯದ ಸ್ಥಾಪಕ ಹರಿಹರನಿಗೆ ತಿಳಿಸಿದರೆಂದು ಅದರಂತೆ ಹೊರತೆಗೆದು 150 ವರ್ಷಗಳ ಕಾಲ ಆನೆಗೊಂದಿಯಲ್ಲಿ ಅಲಂಕರಿಸಿದರೆಂದೂ ಬಳಿಕ ವಿಜಯನಗರದ ಅವನತಿಯ ವೇಳೆಗೆ ಶ್ರೀರಂಗಪಟ್ಟಣದಲ್ಲಿದ್ದ ವಿಜಯನಗರದ ರಾಯಬಾರಿಯ ಅರಮನೆಗೆ ಸಾಗಿಸಲಾಯಿತೆಂದು ಹೇಳಲಾಗಿದೆ. ಆ ಬಳಿಕ 1609ರಲ್ಲಿ ಆಗಿನ ಮೈಸೂರು ಅರಸರಾದ ರಾಜ ಒಡೆಯರ್ ಶ್ರೀರಂಗರಾಜುಲುರನ್ನು ತಲಕಾಡಿಗೆ ಓಡಿಸಿ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡರು. 1610ರಲ್ಲಿ ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದಾಗ ಸಿಂಹಾಸನವನ್ನು ಮೈಸೂರಿನ ಅರಮನೆಗೆ ಸಾಗಿಸಲಾಯಿತು.

ಸಿಂಹಾಸನವು ಚಿನ್ನದ ಬಾಳೆಯ ಕಂಬ ಮತ್ತು ಚಿನ್ನದ ಮಾವಿನ ಎಲೆಗಳಿಂದ ಅಲಂಕರಿಸಲ್ಪಟ್ಟಿದೆ. ಛತ್ರಿಯ ತುದಿಯಲ್ಲಿ ಒಡವೆಗಳಿಂದ ಅಲಂಕರಿಸಿದ ಪಕ್ಷಿಯನ್ನು ಕೂರಿಸಲಾಗಿದೆ. ಸಿಂಹಾಸನವನ್ನು ಹತ್ತುವ ಎರಡು ಕಡೆಗಳಲ್ಲೂ ಸ್ತ್ರೀಪುತ್ಥಳಿಯನ್ನು ನಿರ್ಮಿಸಲಾಗಿದೆ. ಜೊತೆಗೆ ಛತ್ರಿಯ ಸುತ್ತಲೂ ಮುತ್ತಿನ ಕುಚ್ಚುಗಳನ್ನು ಕಟ್ಟಲಾಗಿದೆ. ಅಲ್ಲದೆ ಸಿಂಹಾಸನಕ್ಕೆ ಕೂರ್ಮರೂಪದ ಆಸನವನ್ನು ಒದಗಿಸಲಾಗಿದೆ. ಉಭಯ ಪಾಶ್ವಗಳಲ್ಲಿ ಯಾಳಿಗಳನ್ನು ಮತ್ತು ನಾಲ್ಕು ಕಡೆಗಳಲ್ಲಿ ಬಳ್ಳಿ ಲತೆಗಳನ್ನು ಕೆತ್ತಲಾಗಿದೆ.
ಸಿಂಹಾಸನದ ದಕ್ಷಿಣದಲ್ಲಿ ಬ್ರಹ್ಮ, ಉತ್ತರದಲ್ಲಿ ಶಿವ, ಮಧ್ಯದಲ್ಲಿ ವಿಷ್ಣುವನ್ನು ನಿಲ್ಲಿಸಲಾಗಿದೆ.

ವಿಜಯ ಸೂಚಕ ನಾಲ್ಕು ಸಿಂಹಗಳನ್ನು ಇಡಲಾಗಿದೆ. ಮೂರು ಕೋನಗಳಲ್ಲೂ ರಾಕ್ಷಸ ಶರೀರ, ಎರಡು ಕುದುರೆಗಳು ಮತ್ತು ನಾಲ್ಕು ಹಂಸಪಕ್ಷಿಗಳನ್ನಿಡಲಾಗಿದೆ. ನಾಗದೇವತೆಗಳ ಚಿತ್ರಗಳು, ಸ್ವಸ್ತಿಕ ಆಕೃತಿ ಮತ್ತು ಮುತ್ತಿನ ಹಡಗು ಮೇಲಿನ ಗುಡಾರಗಳ ಚಿತ್ರಣಗಳಿವೆ. ಸಿಂಹಾಸನವನ್ನು ನಾಲ್ಕು ದಿಕ್ಕುಗಳಲ್ಲಿ ತೆರೆಯಲಾಗಿದೆ. ಸಿಂಹಾಸನದ ಛತ್ರಿಯ ಮೇಲೆ ಸಂಸ್ಕøತದ 96 ಸಾಲುಗಳ ಶ್ಲೋಕಗಳಿವೆ. ಒಟ್ಟಾರೆ ಹೇಳಬೇಕೆಂದರೆ ಮೈಸೂರು ರಾಜರ ವೈಭವದ ಪ್ರತೀಕವಾಗಿರುವ ಸಿಂಹಾಸನ ಮೈಸೂರಿಗೊಂದು ಹೆಮ್ಮೆ ಎಂದರೆ ತಪ್ಪಾಗಲಾರದು.